ಜೂನ್.27ರಂದು ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಕೆಂಪೇಗೌಡ ಜಯಂತಿ ಆಚರಣೆ: ಡಿ ಕೆ ಶಿವಕುಮಾರ್ | JANATA NEWS
ಬೆಂಗಳೂರು : ಜೂನ್ 27ರಂದು ಪ್ರತಿ ತಾಲೂಕಿನಲ್ಲಿ ಕೆಂಪೇಗೌಡ ಜಯಂತಿ ಆಚರಣೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಇಂದು ಕೆಂಪೇಗೌಡ ಜಯಂತಿ ಆಚರಣೆ ಪೂರ್ವಭಾವಿ ಸಭೆ ನಂತರ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತನಾಡಿ, ಜೂನ್ 27 ರಂದು ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ ಮಾಡಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.
ಕೆಂಪೇಗೌಡ ಜಯಂತಿ ಕೇವಲ ಒಂದು ಸಮುದಾಯ, ಜಾತಿ ಅಥವಾ ಧರ್ಮಕ್ಕೆ ಸೀಮಿತವಾದುದಲ್ಲ. ಎಲ್ಲಾ ಜಾತಿ ಹಾಗೂ ಧರ್ಮಕ್ಕೆ ಸಲ್ಲುವ ರಾಜ್ಯಮಟ್ಟದ ಕಾರ್ಯಕ್ರಮ. ನಮ್ಮ ಸರ್ಕಾರದ ಅವಧಿಯಲ್ಲಿ ಜೂನ್ 27ರಂದು ಪ್ರತಿ ತಾಲೂಕಿನಲ್ಲಿ ಕೆಂಪೇಗೌಡ ಜಯಂತಿ ಆಚರಣೆ ಮಾಡಬೇಕು ಎಂದು ಆದೇಶ ಮಾಡಿದ್ದೆವು. ಅದೇ ರೀತಿ ಸರ್ಕಾರದ ವತಿಯಿಂದ ಕೆಂಪೇಗೌಡ ಜಯಂತಿ ಕಾರ್ಯಕ್ರಮ ನಡೆಯುತ್ತಿದೆ. ಎಲ್ಲಾ ಸಂಘ ಸಂಸ್ಥೆಗಳು ಭಾಗವಹಿಸುವಂತೆ ಮನವಿ ಮಾಡಿದ್ದೇವೆ ಎಂದರು.
ಈ ಕಾರ್ಯಕ್ರಮದ ಜವಾಬ್ದಾರಿಯನ್ನು ಸ್ಥಳೀಯ ಶಾಸಕರಿಗೆ ನೀಡಲಾಗಿದೆ. ಬಿಬಿಎಂಪಿಯ ಎಲ್ಲಾ ವಾರ್ಡ್ ಗಳಲ್ಲೂ ಕಾರ್ಯಕ್ರಮ ನಡೆಯುತ್ತಿತ್ತು. ಬಿಬಿಎಂಪಿ ಚುನಾವಣೆ ನಡೆಯದ ಹಿನ್ನೆಲೆಯಲ್ಲಿ ವಾರ್ಡ್ ರಚನೆ ಕುರಿತ ಗೊಂದಲ ಹಿನ್ನೆಲೆಯಲ್ಲಿ ಬಿಬಿಎಂಪಿ ವತಿಯಿಂದ ಜೂನ್ 28ರಿಂದ ಜುಲೈ 8ನೇ ತಾರೀಕಿನವರೆಗೆ 28 ವಿಧಾನಸಭಾ ಕ್ಷೇತ್ರ ಮಟ್ಟದಲ್ಲಿ ಸ್ಥಳೀಯ ಶಾಸಕರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ಆಚರಿಸಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆ ಕಾರ್ಯಕ್ರಮ ನಡೆಯಲಿದೆ. ಬೆಂಗಳೂರಿನಲ್ಲಿ ಜೂನ್ 27ರ ಬೆಳಗ್ಗೆ 9 ಗಂಟೆಗೆ ಕೆಂಪೇಗೌಡರ 4 ಗೋಪುರಗಳಿಂದ ಹಾಗೂ ಮಾಗಡಿಯಿಂದ ಮೂರ್ನಾಲ್ಕು ಶಾಸಕರ ಸಮ್ಮುಖದಲ್ಲಿ ಜ್ಯೋತಿ ಉದ್ಘಾಟನೆ ಮಾಡಲಾಗುವುದು. ಈ ಕಾರ್ಯಕ್ರಮಕ್ಕೆ ಐವರು ಸಚಿವರು ತೆರಳಲಿದ್ದಾರೆ. ಅಂದು 12 ಗಂಟೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ರಾಜ್ಯಮಟ್ಟದ ಕಾರ್ಯಕ್ರಮ ನಡೆಯಲಿದೆ. ಪ್ರಶಸ್ತಿ ಕಾರ್ಯಕ್ರಮ ಜರುಗಲಿದ್ದು, ಬಿ.ಎಲ್ ಶಂಕರ್ ಅವರ ನೇತೃತ್ವದ ಸಮಿತಿ ಪ್ರಶಸ್ತಿ ಪುರಸ್ಕೃತರನ್ನು ಆಯ್ಕೆ ಮಾಡಲಿದೆ.
ಎಲ್ಲಾ ಕಾರ್ಯಕ್ರಮಗಳನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕಂದಾಯ ಇಲಾಖೆ ವ್ಯಾಪ್ತಿಯಲ್ಲಿ ಬರುವ ಕೆಂಪೇಗೌಡ ಪ್ರಾಧಿಕಾರ ವತಿಯಿಂದ ನಡೆಸಲಾಗುವುದು. ಇನ್ನು, ಪಾಲಿಕೆ ವತಿಯಿಂದ ಜುಲೈ 9 ರಂದು 198 ವಾರ್ಡ್ ಗಳಲ್ಲಿ ಬೆಂಗಳೂರಿಗೆ ಸೇವೆ ಮಾಡಿದವರನ್ನು ಗುರುತಿಸಿ ಅವರಿಗೆ ಕೆಂಪೇಗೌಡ ಬೆಂಗಳೂರು ನಗರ ಪ್ರಶಸ್ತಿ ನೀಡಲಾಗುವುದು ಎಂದು ಶಿವಕುಮಾರ್ ಮಾಹಿತಿ ನೀಡಿದರು.