ಇಂದು ಅನ್ನಭಾಗ್ಯ ಯೋಜನೆಯಡಿ ಫಲಾನುಭವಿಗಳ ಖಾತೆಗೆ ಹಣ ಜಮೆ! | JANATA NEWS
ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆಯಡಿ ಪಡಿತರದಾರರಿಗೆ ಹಣ ವರ್ಗಾವಣೆ ಪ್ರಕ್ರಿಯೆಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ.
ಇಂದು ಸರ್ಕಾರದ ಮೂರನೇ ಗ್ಯಾರಂಟಿ ಯೋಜನೆ ಆರಂಭಗೊಳ್ಳಲಿದ್ದು ಬಿಪಿಎಲ್ ಹಾಗೂ ಅಂತ್ಯೋದಯಪಡಿತರ ದಾರರಿಗೆ ಅನ್ನಭಾಗ್ಯ ಯೋಜನೆಯ ಹಣ ವರ್ಗಾವಣೆ ಆಗಲಿದೆ.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಕಾರ್ಯಕ್ರಮ ನಡೆಯಲಿದೆ. ಪ್ರತಿ ಕೆಜಿಗೆ 34 ರೂ.ನಂತೆ 170 ರೂ. ವರ್ಗಾವಣೆ ಮಾಡಲಾಗುತ್ತದೆ.
ರಾಜ್ಯದಲ್ಲಿ 1.28 ಕೋಟಿ ಕುಟುಂಬಗಳ ಬಳಿ ಬಿಪಿಎಲ್ ಕಾರ್ಡ್ಗಳಿವೆ. ಸುಮಾರು 4.5 ಕೋಟಿ ಜನರು ಉಚಿತ ಅಕ್ಕಿಯ ಫಲಾನುಭವಿಗಳಿದ್ದಾರೆ. ಇವರಿಗೆ ಕೆಜಿಗೆ 34 ರೂ. ಹಾಕಲು ಸರ್ಕಾರಕ್ಕೆ 733 ಕೋಟಿ ರೂಪಾಯಿ ಹಣ ಬೇಕು. 1.22 ಕೋಟಿ ಜನರು ಆಧಾರ್ ಹಾಗೂ ಬ್ಯಾಂಕ್ ಅಕೌಂಟ್ ಲಿಂಕ್ ಮಾಡಿಸಿದ್ದಾರೆ. ಇನ್ನು 6 ಲಕ್ಷದಷ್ಟು ಅಕೌಂಟ್ಗಳು ಬ್ಯಾಂಕ್ ಅಕೌಂಟ್ ಲಿಂಕ್ ಮಾಡಿಸಿಲ್ಲ.
ಇದೀಗ ಐದು ಕೆಜಿ ಅಕ್ಕಿ ಜತೆಗೆ ಉಳಿದ 5 ಕೆ.ಜಿ ಅಕ್ಕಿ ಬದಲಿಗೆ 170 ರೂ. ಹಣವನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ವರ್ಗಾವಣೆ ಆಗಲಿದ್ದು ಇಂದು ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕೃತ ಚಾಲನೆ ನೀಡಲಿದ್ದಾರೆ. ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಇಂದು ಸಂಜೆ 5 ಗಂಟೆಗೆ ಹಣ ವರ್ಗಾವಣೆಗೆ ಚಾಲನೆ ಕೊಡಲಿದ್ದಾರೆ. ಈ ಮೂಲಕ ಈ ತಿಂಗಳೊಳಗೆ ಪಡಿತರದಾರರ ಖಾತೆಗೆ ಹಣ ಜಮಾ ಆಗಲಿದೆ.