ನೈಸ್ ಯೋಜನೆಗೆ ಹೆಚ್.ಡಿ.ದೇವೇಗೌಡರೇ ಸಹಿ ಹಾಕಿದ್ದು ಎಂದು ಹೇಳುವ ಮೂಲಕ ತಾವು ಎಸಗಿದ ಅಕ್ರಮಕ್ಕೆ ತೇಪೆ ಹಚ್ಚಲು ಹೊರಟಿದ್ದಾರೆ | JANATA NEWS
ಬೆಂಗಳೂರು : ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಮುಖ್ಯಮಂತ್ರಿ ಆಗಿದ್ದಾಗ ನೈಸ್ ಯೋಜನೆಗೆ ಒಪ್ಪಂದ ಮಾಡಿಕೊಳ್ಳಲಾಯಿತು ಎಂದು ಹೇಳಿದ್ದ ಡಿಕೆಶಿ ಅವರ ವಿರುದ್ಧ ಕಿಡಿಕಿಡಿಯಾಗಿರುವ ಅವರು, ನೈಸ್ ಅಕ್ರಮಗಳಲ್ಲಿ ನಿಮ್ಮ ಪಾತ್ರವೇನು ಎಂದು ನೇರವಾಗಿ ಪ್ರಶ್ನಿಸಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಇದೇನು ಬುಲ್ಡೋಜ್ ಬೆಂಗಳೂರಾ? ನೈಸ್ ಯೋಜನೆಗೆ ಹೆಚ್.ಡಿ.ದೇವೇಗೌಡರೇ ಸಹಿ ಹಾಕಿದ್ದು ಎಂದು ಹೇಳುವ ಮೂಲಕ ತಾವು ಎಸಗಿದ ಅಕ್ರಮಕ್ಕೆ ತೇಪೆ ಹಚ್ಚಲು ಹೊರಟಿದ್ದಾರೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು. ಆದರೆ, ಅದೇ ದೇವೇಗೌಡರ ಕಾಲದಲ್ಲಿ ಆಗಿದ್ದ ಮೂಲ ಒಪ್ಪಂದದ ಬಗ್ಗೆ ಅವರದ್ದು ಧ್ಯಾನಸ್ಥ ಮೌನ!! ಯಾಕೆ?? ಎಂದು ಪ್ರಶ್ನಿಸಿದ್ದಾರೆ. ಅಲ್ಲದೆ, ಬುಲ್ಡೋಜ್ ಬೆಂಗಳೂರು ಹಾಗೂ ಬುಲ್ಡೋಜ್ ಕರ್ನಾಟಕ ಎಂದು ಹ್ಯಾಷ್ ಟ್ಯಾಗ್ ಮಾಡಿ ನೇರವಾಗಿ ಡಿಕೆಶಿ ಅವರನ್ನು ಕುಟುಕಿದ್ದಾರೆ.
ನೈಸ್ ರಸ್ತೆಯ 'ತಿರುಚಿದ ಒಪ್ಪಂದ'ದ ಬಗ್ಗೆಯೂ ಡಿಕೆಶಿ ಅವರು ಹೇಳಬೇಕಿತ್ತಲ್ಲವೇ? ಬ್ರ್ಯಾಂಡ್ ಬೆಂಗಳೂರು ಟೀಮಿನ ಮುಖ್ಯಸ್ಥರ ಕರಾಮತ್ತಿನ ಬಗ್ಗೆಯೂ ಬೆಳಕು ಚೆಲ್ಲಬೇಕಲ್ಲವೇ? ಅದು ಬಿಟ್ಟು, ಸತ್ಯ ಮರೆಮಾಚಿ ಬರೀ 'ಸಹಿ'ಯ ಬಗ್ಗೆ ನೀವು ಗೊಣಗಿದ್ದು ಯಾಕೆ? ಸದನ ಸಮಿತಿ ವರದಿಯ ಬಗ್ಗೆಯೂ ಚಕಾರ ಎತ್ತದಿರುವುದು ಯಾಕೋ.. ಏನಿದು ಈ ನಿಗೂಢ ಸೋಜಿಗ?? ಎಂದು ಕುಮಾರಸ್ವಾಮಿ ಅವರು ಅಚ್ಚರಿ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿ ಉರುಫ್ ನೈಸ್ ರಸ್ತೆ ಯೋಜನೆಗೆ ರಾಜ್ಯ ಸರಕಾರದಿಂದ ನಯಾಪೈಸೆ ಕೊಡುವುದಿಲ್ಲ, ಪೂರ್ಣ ಹೂಡಿಕೆ ಹಣವನ್ನು ಕಂಪನಿಯೇ ಭರಿಸಬೇಕು, ಭೂಸ್ವಾಧೀನವೂ ಸೇರಿ ಸರಕಾರದ ಮೇಲೆ ಯಾವುದೇ ಹೊರೆ ಇರುವಂತಿಲ್ಲ. ಇದು ದೇವೇಗೌಡರ ಕಾಲದಲ್ಲಿ ಆದ ಮೂಲ ಒಪ್ಪಂದದ ಸಾರಾಂಶ. ಹಾಗಾದರೆ, ಈ ಯೋಜನೆ 'ಸಾರ'ವಾಗಿದ್ದು ಯಾರಿಗೆ? ಎಂದು ಉಪ ಮುಖ್ಯಮಂತ್ರಿಗಳನ್ನು ಕುಟುಕಿದ್ದಾರೆ.
ಬ್ರ್ಯಾಂಡ್ ಬೆಂಗಳೂರು ಹರಿಕಾರಾಗಲು ಹೊರಟಿರುವ ನೀವು, 'ತಿರುಚಿದ ಒಪ್ಪಂದ'ದ ಸೂತ್ರಧಾರರನ್ನೇ ಪಕ್ಕದಲ್ಲಿ ಇಟ್ಟುಕೊಂಡಿದ್ದೀರಿ. ಒಪ್ಪಂದ ತಿರುಚಿದ ಪರಿಣಾಮ ರಾಜ್ಯವು ಕೋರ್ಟ್ ಕಟಕಟೆಯಲ್ಲಿ ನಿಲ್ಲಬೇಕಾಯಿತು. ಸಾವಿರಾರು ಕೋಟಿ ಲೂಟಿಯಾಯಿತು. ಸರಕಾರ & ಜನರ ಸಾವಿರಾರು ಎಕರೆ ಭೂಮಿ ಭೂಗಳ್ಳರ ಪಾಲಾಯಿತು ಎಂದು ಮಾಜಿ ಮುಖ್ಯ ಕಾರ್ಯದರ್ಶಿ ಇಬ್ಬರ ವಿರುದ್ಧ ಮಾಜಿ ಮುಖ್ಯಮಂತ್ರಿಗಳು ಟೀಕಾ ಪ್ರಹಾರ ನಡೆಸಿದ್ದಾರೆ.
ನೈಸ್ ಕರ್ಮವನ್ನೆಲ್ಲ ಒಮ್ಮೆ ಕಣ್ಮುಚ್ಚಿ ನೆನಪು ಮಾಡಿಕೊಳ್ಳಿ. ಅಲ್ಲಿ ನೀವೆಲ್ಲಿ ನಿಲ್ಲುತ್ತಿರಿ ಎಂದು ಊಹಿಸಿಕೊಳ್ಳಿ, ಮಾಡಿದ ಪಾಪಗಳೆಲ್ಲವೂ ಸ್ಲೈಡುಗಳಂತೆ ಪ್ರತ್ಯಕ್ಷವಾಗುತ್ತವೆ. ಗಂಗೆಯಲ್ಲಿ ಸಾವಿರ ಸಲ ಮುಳುಗಿದರೂ ಅಳಿಯದ ಪಾಪವದು.ರಾಜ್ಯವನ್ನೇ ದೋಚಿದ ಖಾಸಗಿ ಕಂಪನಿಗೆ 'ಪೊಲಿಟಿಕಲ್ ಏಜೆಂಟ್' ಆಗುವುದಕ್ಕೆ ಅಸಹ್ಯ ಅನಿಸುವುದಿಲ್ಲವೇ? ಎಂದು ಕುಮಾರಸ್ವಾಮಿ ಅವರು ಕಿಡಿ ಕಾರಿದ್ದಾರೆ.
ನೈಸ್ ಯೋಜನೆ ಯಾರಿಗೆಲ್ಲಾ ಕಾಮಧೇನು, ಕಲ್ಪವೃಕ್ಷವಾಗಿದೆ ನನಗಿಂತ ನಿಮಗೆ ಚೆನ್ನಾಗಿ ಗೊತ್ತು. ಧನಪಿಶಾಚಿ ರಾಜಕಾರಣಿಗಳು, ಮುಖ್ಯ ಕಾರ್ಯದರ್ಶಿ ಮಟ್ಟದವರೂ ಸೇರಿ ಅನೇಕ ಅಧಿಕಾರಿಗಳ 'ಅನೈತಿಕ ಭ್ರಷ್ಟವ್ಯೂಹ' ಕರ್ನಾಟಕವನ್ನು ಕಂಡರಿಯದ ರೀತಿಯಲ್ಲಿ ಲೂಟಿ ಮಾಡಿದೆ. ಈ ಲೂಟಿಯ ಕಥೆಯಲ್ಲಿ ನಿಮ್ಮ ಪಾತ್ರವೇನು? ಎಂದು ಡಿಕೆಶಿ ಅವರನ್ನು ಕುಮಾರಸ್ವಾಮಿ ಅವರು ನೇರವಾಗಿ ಪ್ರಶ್ನಿಸಿದ್ದಾರೆ.