ಕರ್ನಾಟಕದಿಂದ ತಮಿಳುನಾಡಿಗೆ 10 ಟಿಎಂಸಿ ಕಾವೇರಿ ನೀರು ಬಿಡಲಾಗುವುದು: ಡಿಕೆ ಶಿವಕುಮಾರ್ | JANATA NEWS
ಬೆಂಗಳೂರು : ಕರ್ನಾಟಕದಿಂದ ತಮಿಳುನಾಡಿಗೆ 10 ಟಿಎಂಸಿ ಕಾವೇರಿ ನೀರು ಬಿಡಲಾಗುವುದು ಎಂದು ಜಲಸಂಪನ್ಮೂಲ ಸಚಿವರು ಆಗಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಕಾವೇರಿ ನೀರು ಬಿಡುವಂತೆ ಕರ್ನಾಟಕಕ್ಕೆ ನಿರ್ದೇಶನ ನೀಡುವಂತೆ ಕೋರಿ ತಮಿಳುನಾಡು ಸುಪ್ರೀಂ ಕೋರ್ಟ್ಗೆ ಮೊರೆ ಹೋದ ಒಂದು ದಿನದ ನಂತರ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ. ತಮಿಳುನಾಡಿನವರು ಸುಪ್ರೀಂ ಕೋರ್ಟ್ಗೆ ಹೋಗುವ ಅಗತ್ಯವಿರಲಿಲ್ಲ ಮತ್ತು ನೆರೆಯ ರಾಜ್ಯಕ್ಕೆ 10 ಟಿಎಂಸಿ ನೀರು ಬಿಡಲಾಗುವುದು ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.
ತಮಿಳುನಾಡಿಗೆ ನೀರು ಬಿಡುವ ಮುನ್ನ ಜನರು ಮತ್ತು ರೈತರ ಕುಡಿಯುವ ನೀರಿನ ಹಿತವನ್ನು ಸರ್ಕಾರ ಪರಿಗಣಿಸಲಿದೆ ಎಂದು ಜಲಸಂಪನ್ಮೂಲ ಸಚಿವರೂ ಆಗಿರುವ ಶಿವಕುಮಾರ್ ಹೇಳಿದ್ದಾರೆ.
ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ತಮಿಳುನಾಡಿಗೆ ನೀರು ಬಿಡುವ ವಿಚಾರದಲ್ಲಿ ಕಠಿಣ ನಿಲುವು ತೆಗೆದುಕೊಳ್ಳುವಂತೆ ಸೋಮವಾರ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ಕಾವೇರಿ ಜಲಾನಯನ ಪ್ರದೇಶದ ನಾಲ್ಕು ಅಣೆಕಟ್ಟೆಗಳಲ್ಲಿ ಪ್ರಸ್ತುತ ಇರುವ ನೀರಿನ ಸಾಮರ್ಥ್ಯವು ಬೆಂಗಳೂರಿಗೆ ಕುಡಿಯುವ ನೀರು ಪೂರೈಕೆಗೆ ಸಾಕಾಗುವುದಿಲ್ಲ ಎಂದು ಬೊಮ್ಮಾಯಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.