ತಮಿಳುನಾಡಿಗೆ ಪ್ರತಿ ದಿನ 3000 ಕ್ಯೂಸೆಕ್ ನೀರು ಹರಿಸುವಂತೆ ಮತ್ತೆ ಆದೇಶ, ರೈತರ ಆಕ್ರೋಶ | JANATA NEWS
ಬೆಂಗಳೂರು : ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಶುಕ್ರವಾರ ನಡೆದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲೂ ಅಕ್ಟೊಬರ್15ರವರೆಗೆ ಪ್ರತಿದಿನ 3000 ಕ್ಯೂಸೆಕ್ ನೀರು ಹರಿಸುವಂತೆ ಆದೇಶ ನೀಡಿದೆ.
ತಮಿಳುನಾಡಿಗೆ ಕಾವೇರಿ ನೀರು ಹರಿಸದಂತೆ ಒತ್ತಾಯಿಸಿ ಇಂದು ಕನ್ನಡ ಪರ ಸಂಘಟನೆಗಳು ಮತ್ತು ರೈತರು ಸೇರಿದಂತೆ ಹಲವಾರು ಸಂಘಟನೆಗಳು ಕರ್ನಾಟಕ ಬಂದ್ಗೆ ಕರೆ ನೀಡಿದ್ದವು. ತಮಿಳುನಾಡಿಗೆ ನೀರು ಹರಿಸದಂತೆ ಒತ್ತಾಯಿಸಿ ಒಂದು ವಾರದಲ್ಲಿ ನಡೆದ ಎರಡನೇ ಬಂದ್ ಇದಾಗಿದೆ.
ತಮಿಳುನಾಡಿಗೆ 15 ದಿನಗಳ ಕಾಲ ಪ್ರತಿ ದಿನ 3 ಸಾವಿರ ಕ್ಯೂಸೆಕ್ ನೀರು ಹರಿಸಬೇಕೆಂದು ಮಂಗಳವಾರ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿದ್ದ ಆದೇಶವನ್ನು ಪಾಲಿಸುವಂತೆ ಸಿಡಬ್ಲ್ಯುಎಂಎ ಸೂಚನೆ ನೀಡಿದೆ.
ಸರ್ಕಾರ ಈ ವಿಚಾರವಾಗಿ ಮಾತನಾಡಬೇಕು. ಸಂಜೆ ಆರು ಗಂಟೆ ಒಳಗೆ ನಿಮ್ಮ ಅಭಿಪ್ರಾಯವನ್ನ ಸರ್ಕಾರ ತಿಳಿಸಬೇಕು. ಇಲ್ಲವಾದರೇ ಹೋರಾಟದ ರೂಪ ಬದಲಾಗುತ್ತದೆ ಎಂದು ರೈತರು ಆಕ್ರೋಶ ಹೊರಹಾಕಿದ್ದು, ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಕಾರ್ಯಕರ್ತರು ಬೆಂಗಳೂರು ಮೈಸೂರು ಹೆದ್ದಾರಿ ತಡೆದು ಪ್ರತಿಭಟಿಸಿದರು.
ಜೂನ್ನಿಂದ ಸೆಪ್ಟೆಂಬರ್ವರೆಗೆ ಕರ್ನಾಟಕ 123 ಟಿಎಂಸಿ ನೀರು ಹರಿಸಬೇಕಿತ್ತು. ಆದರೆ, ಈವರೆಗೆ ಕೇವಲ 40 ಟಿಎಂಸಿ ನೀರು ಮಾತ್ರ ಹರಿಸಿದೆ. ಬಾಕಿ 83 ಟಿಎಂಸಿ ನೀರು ಬಿಡುಗಡೆ ಮಾಡುವಂತೆ ಸೂಚಿಸಬೇಕು ಎಂದು ಸಿಡಬ್ಲ್ಯುಎಂಎ ಸಭೆಯಲ್ಲಿ ತಮಿಳುನಾಡು ಸರ್ಕಾರದ ಪರ ಅಧಿಕಾರಿಗಳು ವಾದ ಮಂಡನೆ ಮಾಡಿದರು.
ತಮಿಳುನಾಡು, ಕರ್ನಾಟಕ, ಕೇರಳ ಪುದುಚೇರಿಯ ಅಧಿಕಾರಿಗಳು ಇದರಲ್ಲಿ ಭಾಗವಹಿಸಿದ್ದರು. ಈ ಸಭೆಯಲ್ಲಿ ಕಾವೇರಿ ನೀರು ನಿರ್ವಹಣಾ ಸಮಿತಿ ಶಿಫಾರಸನ್ನು ಪರಿಶೀಲಿಸಿ ಅ.15ರವರೆಗೆ ಪ್ರತಿ ದಿನ 3000 ಕ್ಯೂಸೆಕ್ ನೀರು ಹರಿಸುವಂತೆ ಆದೇಶ ಹೊರಬಂದಿದೆ.
ತಮಿಳುನಾಡಿಗೆ ನೀರು ಹರಿಸುವುದನ್ನು ವಿರೋಧಿಸಿ ಎಂದು ಅಖಂಡ ಕರ್ನಾಟಕ ಬಂದ್ ಗೆ ಕರೆ ನೀಡಿದ ಕನ್ನಡ ಪರ ಸಂಘಟನೆಗಳು ರಾಜ್ಯದಂತ ಪ್ರತಿಭಟನೆ ಮತ್ತು ಹೋರಾಟ ನಡೆಸುತ್ತಿದ್ದು ಕರ್ನಾಟಕ ಬಂದ್ ಬಹುತೇಕ ಯಶಸ್ವಿಯಾಗಿ ನಡೆಯುತ್ತಿದೆ.