ಕಾವೇರಿ ನೀರು ಸಂಕಷ್ಟ ಸೂತ್ರ ರೆಡಿ ಮಾಡ್ತೇವೆ: ಡಿ.ಕೆ.ಶಿವಕುಮಾರ್ | JANATA NEWS
ಬೆಂಗಳೂರು : ಮಳೆ ಇಲ್ಲದ ಸಂಕಷ್ಟದ ಕಾಲದಲ್ಲಿ ನೀರು ಹರಿಸುವ ಹೊಸ ಸೂತ್ರ ರೂಪಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿಗೆ ಆಗ್ರಹ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.
ಸಂಕಷ್ಟ ಸೂತ್ರ ಆಗ್ರಹ ಮಾಡುವ ಮೊದಲು ನಮಗೆ ಅದರ ಬಗ್ಗೆ ಸ್ಪಷ್ಟತೆ ಇರಬೇಕು. ಅದಕ್ಕೆ ನಾವು ಮೊದಲು ಒಂದು ಸೂತ್ರದ ಬಗ್ಗೆ ಚರ್ಚೆ ಮಾಡುತ್ತೇವೆ. ಅದಕ್ಕಾಗಿ ಇಂದು ಸಂಜೆ ಸಭೆ ಕರೆಯಲಾಗಿದೆ. ರಾಜ್ಯದ ಹಿತವನ್ನು ಸುಪ್ರೀಂಕೋರ್ಟಿನಲ್ಲಿ ಕಾಪಾಡಿದಂತಹ ಹಿರಿಯ ನ್ಯಾಯವಾದಿಗಳು, ಅಡ್ವೋಕೇಟ್ ಜನರಲ್ ಹಾಗೂ ಹಿರಿಯ ನೀರಾವರಿ ತಜ್ಞರ ಜೊತೆ ಮುಖ್ಯಮಂತ್ರಿಗಳ ಕಚೇರಿಯಲ್ಲಿ ಚರ್ಚೆ ನಡೆಸುತ್ತೇವೆ ಎಂದರು.
ಇಂದು ನಡೆಯುವ ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆಗೆ ಆನ್ಲೈನ್ ಮೂಲಕ ಭಾಗವಹಿಸದೇ ಖುದ್ದಾಗಿ ಭಾಗವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ನೀರಿನ ಬಿಡುಗಡೆ ಬಗ್ಗೆ ವಿರೋಧ ಪಕ್ಷದವರು, ಬೇರೆಯವರು ಏನೇನೋ ಹೇಳುತ್ತಾರೆ.
ನನಗೆ ಅವರಿಗಿಂತ, ಬೇರೆಯವರಿಗಿಂತ ಹೆಚ್ಚು ಜವಾಬ್ದಾರಿ ಇದೆ. ಬಾಯಿಗೆ ಬಂದಂತೆ ಮಾತನಾಡುವ ಜಾಯಮಾನ ನನ್ನದಲ್ಲ, ನಾನು ಸಹ ರೈತ ಎಂದು ವಿರೋಧ ಪಕ್ಷದವರಿಗೆ ತಿರುಗೇಟು ನೀಡಿದರು.
ಸಾರ್ವಜನಿಕರಿಗೆ ತೊಂದರೆಯಾಗದ ರೀತಿ ಬಂದ್ ನಿರ್ವಹಣೆ ಮಾಡಿದ್ದೇವೆ. ಕರ್ನಾಟಕ ಬಂದ್ ಮಾಡುವುದು ಅವಶ್ಯಕತೆ ಇರಲಿಲ್ಲ. ಪ್ರತಿಭಟನೆ ಮಾಡಲು ಯಾರಿಗೂ ನಾವು ಅಡ್ಡಿ ಮಾಡುವುದಿಲ್ಲ ಎಂದು ಹೇಳಿದ್ದೆವು, ಅದರಂತೆ ಬಂದ್ ವೇಳೆಯಲ್ಲಿ ಸಾವರ್ಜನಿಕರಿಗೆ ತೊಂದರೆಯಾಗದಂತೆ ರಕ್ಷಣೆ ಕೊಟ್ಟಿದ್ದೇವೆ. ಸಾರಿಗೆ, ದಿನನಿತ್ಯ ಬಳಕೆಯ ವಸ್ತುಗಳ ಲಭ್ಯತೆಗೆ ತೊಂದರೆ ಆಗದಂತೆ ನೋಡಿಕೊಂಡಿದ್ದೇವೆ ಎಂದು ತಿಳಿಸಿದರು.
ಕೆಲವರು ನನ್ನ ಬೇಜವಾಬ್ದಾರಿ ಬಗ್ಗೆ ಮಾತನಾಡುತ್ತಾರೆ. ಅವರ ಹಾಗೆ ನಾನು ಮಾತನಾಡಲ್ಲ. ನನಗೆ ಅವರಗಿಂತ ಜವಾಬ್ದಾರಿ ಹೆಚ್ಚಿದೆ. ಜವಾಬ್ದಾರಿಯುತ ಸಚಿವನಾಗಿ ನಾನು ಮಾತನಾಡಬೇಕು. ಈ ಬಂದ್ ಎಲ್ಲ ಮುಗಿಯಲಿ, ನಾವು ಚರ್ಚೆ ಮಾಡುತ್ತಿದ್ದೇವೆ ಎಂದರು.