ಶಾಲಾ ಬಸ್ ಪಲ್ಟಿಯಾಗಿ ಓರ್ವ ವಿದ್ಯಾರ್ಥಿನಿ ಸಾವು, 20 ಮಕ್ಕಳಿಗೆ ಗಾಯ | Janata news
ಚಿಕ್ಕಮಗಳೂರು : ಶಾಲಾ ಪ್ರವಾಸ ಹಿನ್ನೆಲೆಯಲ್ಲಿ ಶೃಂಗೇರಿಗೆ ಆಗಮಿಸುತ್ತಿದ್ದ ಬಸ್ ಪಲ್ಟಿಯಾಗಿದ್ದು, ಓರ್ವ ವಿದ್ಯಾರ್ಥಿನಿ ಮೃತಪಟ್ಟು, 20ಕ್ಕೂ ಹೆಚ್ಚು ಮಕ್ಕಳಿಗೆ ಗಾಯವಾಗಿದ ಘಟನೆ ಎನ್.ಆರ್.ಪುರ ತಾಲೂಕಿನ ಸೌತಿಕೆರೆ ಗ್ರಾಮದ ಬಳಿ ನಡೆದಿದೆ.
ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕಿನ ಬಾಳೆಕೊಪ್ಪ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಪಲ್ಟಿಯಾಗಿದ್ದು, ಸ್ಥಳದಲ್ಲಿಯೇ ದಿಯಾ(16) ಎಂಬ ವಿಧ್ಯಾರ್ಥಿನಿ ಮೃತಪಟ್ಟಿದ್ದಾಳೆ. ದಿಯಾ 10ನೇ ತರಗತಿಯಲ್ಲಿ ವ್ಯಾಸಾಂಗ ಮಾಡುತ್ತಿದ್ದಳು. ಘಟನೆಯಲ್ಲಿ 20 ಕ್ಕೂ ಹೆಚ್ಚು ಮಕ್ಕಳು ಗಾಯಗೊಂಡಿದ್ದಾರೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಪೂರ್ಣಪ್ರಜ್ಞಾ ಶಾಲಾ ಬಸ್ ಇದಾಗಿದ್ದು, ಶಾಲಾ ಪ್ರವಾಸ ಹಿನ್ನೆಲೆಯಲ್ಲಿ ಶೃಂಗೇರಿಗೆ ಆಗಮಿಸುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ.
ಗಾಯಾಳುಗಳನ್ನು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಎನ್.ಆರ್.ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.