ಗುಪ್ತಾಂಗಕ್ಕೆ ಸ್ಕ್ರೂ ಡ್ರೈವರ್ನಿಂದ ಇರಿತ – ಐಸಿಯುನಲ್ಲಿದ್ದ ಯುವತಿ ಸಾವು | Janata news
ಚಿಕ್ಕಮಗಳೂರು : ಐದು ದಿನಗಳ ಹಿಂದೆ ಭಗ್ನ ಪ್ರೇಮಿಯಿಂದ ಇರಿತಕ್ಕೊಳಗಾಗಿದ್ದ 23 ವರ್ಷದ ಯುವತಿ ಚಿಕಿತ್ಸೆ ಫಲಕಾರಿಯಾಗದೇ ಮಂಗಳೂರಿನ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ.
ಬಿಂದು(23) ಮೃತಪಟ್ಟ ಯುವತಿ. ಬಿಂದು ಚಿಕ್ಕಮಗಳೂರು ಜಿಲ್ಲೆಯ ಎನ್. ಆರ್. ಪುರ ತಾಲೂಕಿನ ಬಸಾಪುರದ ನಿವಾಸಿಯಾಗಿದ್ದು, ಮಿಥುನ್ ಬಾಳೆಹೊನ್ನೂರಿನ ಗಡಿಗೇಶ್ವರದ ನಿವಾಸಿ ಆಕೆಗೆ ಚಾಕುವಿನಿಂದ ಇರಿದಿದ್ದ.
ಮಿಥುನ್ ಮತ್ತು ಮೃತ ಯುವತಿ ಬಿಂದು ಇಬ್ಬರು ಕ್ಲಾಸ್ ಮೇಟ್ಸ್ ಆಗಿದ್ದರು, 10ನೇ ತರಗತಿ ವರೆಗೂ ಜೊತೆಗೆ ಓದಿದ್ದರು.ಬಳಿಕ ಬಿಂದು ಫೇಸ್ಬುಕ್ನಲ್ಲಿ ಆರೋಪಿ ಮಿಥುನ್ ಜೊತೆ ಸ್ನೇಹ ಬೆಳೆಸಿಕೊಂಡಿದ್ದಳು. ಬಿಂದು ಯಾವಾಗಲೂ ಮಿಥುನ್ನನ್ನು ಕ್ಲೋಸ್ ಫ್ರೆಂಡ್ ಎಂದು ಹೇಳುತ್ತಿದ್ದಳು. ಮಿಥುನ್ ಯುವತಿಯನ್ನು ತುಂಬಾ ಪ್ರೀತಿಸುತ್ತಿದ್ದನು ಎನ್ನಲಾಗಿದೆ.
ಕಳೆದ 5 ದಿನದ ಹಿಂದೆ ಬಿಂದು ತನ್ನ ಫೇಸ್ಬುಕ್ ಗೆಳೆಯ ಮಿಥುನ್ ಜೊತೆ ಜಾಲಿ ರೇಡ್ಗೆ ಹೋಗಿದ್ದಾಳೆ. ಇಬ್ಬರು ಕಳಸ, ಹೊರನಾಡು ಹೋಗಿ ಹಿಂತಿರುಗಿ ಬರುವಾಗ ಕಗ್ಗನಹಳ್ಳದ ಬಳಿ ಭದ್ರಾ ನದಿ ದಂಡೆ ಮೇಲೆ ಕೂತು ಮಾತನಾಡುತ್ತಿದ್ದರು. ಈ ವೇಳೆ ಬಿಂದು ತನ್ನ ಮಾಜಿ ಗೆಳೆಯನ ಬಗ್ಗೆ ಹೇಳಿಕೊಂಡಿದ್ದಾಳೆ. ಮಾಜಿ ಪ್ರಿಯಕರನ ಹೆಸರು ಹೇಳುತ್ತಿದ್ದಂತೆಯೇ ಆಕೆಯನ್ನು ಹುಚ್ಚನಂತೆ ಪ್ರೀತಿಸುತ್ತಿದ್ದ ಮಿಥುನ್ ಕೋಪ ನೆತ್ತಿಗೇರಿದೆ.
ಮಿಥುನ್ ಆಕೆಯನ್ನು ದಂಡೆಯಿಂದ ಭದ್ರಾ ನದಿಗೆ ನೂಕಿದ್ದಾನೆ. ಆಕೆ ಎದ್ದು ಬರುವಾಗ ಮನಸ್ಸೋ ಇಚ್ಛೆ ಕಲ್ಲು ಎಸೆದಿದ್ದಾನೆ. ನಂತರ ಸ್ಕ್ರೂ ಡ್ರೈವರ್ ನಿಂದ ಆಕೆಯ ಹೊಟ್ಟೆ ಮತ್ತು ಖಾಸಗಿ ಭಾಗಗಳಿಗೆ ಚುಚ್ಚಿ ಅಲ್ಲಿಂದ ಪರಾರಿಯಾಗಿದ್ದನು. ಸ್ಥಳೀಯರು ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದರು.
ಈ ಸಂಬಂಧ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಿಂದುಗೆ ಚಾಕುವಿನಿಂದ ಇರಿದಿದ್ದ ಮಿಥುನ್ ಆ ನಂತರ ನಾಪತ್ತೆಯಾಗಿದ್ದ. ಆ ಮೇಲೆ ತಾನಾಗಿಯೇ ಬಂದು ಪೊಲೀಸರಿಗೆ ಶರಣಾಗಿದ್ದ.
ಯುವತಿಯನ್ನು ಮೊದಲು ಚಿಕ್ಕಮಗಳೂರು ಹಾಗೂ ಹಾಸನದ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಅಲ್ಲಿ ಬಿಂದು ಚಿಕಿತ್ಸೆಗೆ ಸರಿಯಾಗಿ ಸ್ಪಂದಿಸದ ಕಾರಣ ಆಕೆಯನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿದ್ದರು. ಯುವತಿ ಚಿಕಿತ್ಸೆ ಫಲಕಾರಿಯಾಗದೇ ಮಂಗಳೂರಿನ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ.