ಉಪಚುನಾವಣೆಯಲ್ಲಿ ಗೆದ್ದವರಿಗೆಲ್ಲ ಸಚಿವ ಸ್ಥಾನ ಎಂದ ಸಿಎಂ ಯಡಿಯೂರಪ್ಪ ! | Janata news
ಬೆಂಗಳೂರು : ಬಿಜೆಪಿ ಅಧಿಕಾರಕ್ಕೆ ಬರಲು ಕಾರಣರಾದ ಶಾಸಕರ ಕ್ಷೇತ್ರಗಳಲ್ಲಿ ಚುನಾವಣೆ ಇದ್ದು, ಗೆದ್ದು ಬರುವ ಎಲ್ಲ ಶಾಸಕರಿಗೆ ಮಂತ್ರಿ ಭಾಗ್ಯ ಸಿಗಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.
ಶನಿವಾರ ನಡೆದ ಕಾಗವಾಡ ಕ್ಷೇತ್ರದ ಶಿರಗುಪ್ಪಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಲ್ಲ 15 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಆಯ್ಕೆ ಆಗಲಿದ್ದಾರೆ ಎಂಬ ವಿಶ್ವಾಸ ಇದೆ ಎಂದಿದ್ದಾರೆ. ಶಾಸಕರು ರಾಜೀನಾಮೆ ನೀಡಿದ್ದಕ್ಕಾಗಿ ನಾನು ಮುಖ್ಯಮಂತ್ರಿ ಆಗಿದ್ದೇನೆ. ಅವರಿಗೆ ಕೊಟ್ಟ ಮಾತು ಉಳಿಸಿಕೊಳ್ಳುವ ಜವಾಬ್ದಾರಿ ನಮ್ಮದು. ಅವರಿಗೆ ಅನ್ಯಾಯ ಆಗದಂತೆ ನೋಡಿಕೊಳ್ಳಲಾಗುವುದು. ಎಲ್ಲರನ್ನೂ ಮಂತ್ರಿ ಮಾಡಲಾಗುವುದು ಎಂದು ಹೇಳಿದರು.
ಜಿಲ್ಲೆಯಲ್ಲಿ ನದಿಗಳ ಪ್ರವಾಹದಿಂದ ಮುಳುಗಡೆಯಾದ ಪ್ರದೇಶಗಳ ಸ್ಥಳಾಂತರಕ್ಕೆ ಕ್ರಮ ಕೈಗೊಳ್ಳಲಾಗುವುದು. ಇದಕ್ಕಾಗಿ ಅಗತ್ಯ ಭೂಮಿಯನ್ನು ಖರೀದಿಸಿ ನವ ನಿರ್ಮಾಣ ಮಾಡಿ ಸ್ಥಳಾಂತರಿಸಲಾಗುವುದು ಎಂದರು.
ರಾಜ್ಯ ಬಿಜೆಪಿ ಸರಕಾರ ಮೂರು ವರ್ಷಗಾಲ ಅವಧಿ ಪೂರ್ಣ ಗೊಳಿಸುತ್ತದೆ. ಈ ಅವಧಿಯಲ್ಲಿ ನೀರಾವರಿ ಯೋಜನೆ ಹೆಚ್ಚಿನ ಆದ್ಯತೆ ನೀಡಲಾಗುವುದು, ಏತ ನೀರಾವರಿ ಯೋಜನೆ ಅನುಷ್ಠಾನಕ್ಕೆ ಹಿನ್ನೆಡೆಯಾಗಿದೆ. ಮುಂದಿನದಿನಗಳಲ್ಲಿ ಈ ಯೋಜನೆ ಪೂರ್ಣಗೊಳಿಸಲು ಪ್ರಯತ್ನ ಮಾಡಲಾಗುವುದು.. ಜೊತೆಗೆ ರೈತರು ಬೆಳೆದ ಬೆಳೆಗಳಿಗೆ ಹೆಚ್ಚಿನ ವೈಜ್ಞಾನಿಕ ಬೆಲೆಗಳನ್ನು ನಿಗದಿಗೊಳಿಸಲಾಗುವುದು ಎಂದರು.