ಅಂಬರೀಷ್ ಸ್ಮಾರಕ ನಿರ್ಮಾಣಕ್ಕೆ, 1 ಎಕರೆ 34 ಗುಂಟೆ ಜಾಗ & ₹ 5 ಕೋಟಿ ನೀಡಿದ ರಾಜ್ಯ ಸರ್ಕಾರ! | Janata news
ಬೆಂಗಳೂರು : ಹಿರಿಯ ನಟ ಡಾ. ಅಂಬರೀಷ್ ಅವರ ಸ್ಮಾರಕವನ್ನು ನಿರ್ಮಿಸಲು ಕಂಠೀರವ ಸ್ಟುಡಿಯೊ ಆವರಣದಲ್ಲಿ ಒಂದು ಎಕರೆ 34 ಗುಂಟೆ ಜಾಗ ಗುರುತಿಸಲಾಗಿದ್ದು, ಶೀಘ್ರವೇ ಸ್ಮಾರಕ ನಿರ್ಮಾಣಕ್ಕೆ ಅಗತ್ಯ ಯೋಜನೆ ರೂಪಿಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೂಚಿಸಿದ್ದಾರೆ.
ಇಂದು ಡಾ. ಅಂಬರೀಷ್ ಸ್ಮಾರಕ ಪ್ರತಿಷ್ಠಾನದ ಉನ್ನತ ಮಟ್ಟದ ಸಮಿತಿಯ ಪ್ರಥಮ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಯಡಿಯೂರಪ್ಪ ಶ್ರೀ ಕಂಠೀರವ ಸ್ಟುಡಿಯೋ ಆವರಣದಲ್ಲಿ 1 ಎಕರೆ 34 ಗುಂಟೆ ಜಾಗ ಗುರುತಿಸಲಾಗಿದ್ದು, ಸ್ಮಾರಕ ನಿರ್ಮಾಣಕ್ಕಾಗಿ ರಾಜ್ಯ ಸರ್ಕಾರವು ₹5 ಕೋಟಿ ಒದಗಿಸಲಿದೆ.
ಸ್ಮಾರಕ ನಿರ್ಮಾಣ ತ್ವರಿತಗತಿಯಲ್ಲಿ ನಡೆಯಲು ಅನುಕೂಲವಾಗುವಂತೆ ಇಲಾಖೆಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಉಪ ಸಮಿತಿ ರಚಿಸುವಂತೆ ಸೂಚಿಸಿದರು.
ಸಭೆ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸಂಸದೆ ಸುಮಲತಾ, ಅಂಬರೀಶ್ ಅವರ ಸ್ಮಾರಕಕ್ಕೆ 1 ಎಕರೆ 34 ಗುಂಟೆ ಜಮೀನು ಮಂಜೂರು ಆಗಿದೆ. ಕಂಠೀರವ ಸ್ಟುಡಿಯೋದಲ್ಲಿ ಸಮಾಧಿ ಇರುವ ಜಾಗದಲ್ಲೇ ಸ್ಮಾರಕ ನಿರ್ಮಾಣಕ್ಕೆ ಸರ್ಕಾರ ಒಪ್ಪಿಗೆ ಕೊಟ್ಟಿದೆ. ಸರ್ಕಾರದಿಂದ 5 ಕೋಟಿ ರೂ. ಬಜೆಟ್ ನಲ್ಲಿ ನಿಗದಿ ಮಾಡುವ ಭರವಸೆವನ್ನು ಕೊಟ್ಟಿದ್ದು, ಆದಷ್ಟು ಬೇಗ ಸ್ಮಾರಕ ನಿರ್ಮಾಣ ಕಾರ್ಯ ಆರಂಭಿಸುವುದಾಗಿ ಸಿಎಂ ಹೇಳಿದ್ದಾರೆ ಎಂದರು.
ಅಂಬರೀಶ್ ಸ್ಮಾರಕ ಪ್ರತಿಷ್ಠಾನದ ಕುರಿತು ಸಭೆಯಲ್ಲಿ ಸಭೆಯಲ್ಲಿ ಸಂಸದೆ ಸುಮಲತಾ, ನಿರ್ಮಾಪಕ ರಾಕ್ಲೈನ್ ವೆಂಕಟೇಶ್, ಅಭಿಷೇಕ್, ಹಿರಿಯ ಹಾಸ್ಯ ನಟ ದೊಡ್ಡಣ್ಣ ಸೇರಿದಂತೆ ಹಲವರು ಭಾಗಿಯಾಗಿದ್ದರು.