ಕಲಬುರಗಿ, ಬಾಗಲಕೋಟೆಯಲ್ಲಿ ಮದುವೆಗೆ ನಿಷೇಧ, ರಿಜಿಸ್ಟರ್ ಮ್ಯಾರೇಜ್ಗೆ ಮಾತ್ರ ಅವಕಾಶ! | Janata news
ಬಾಗಲಕೋಟೆ : ಜನ ಸೇರುವ ಮದುವೆ ಸಮಾರಂಭಗಳಿಗೆ ಅನುಮತಿ ನೀಡದಂತೆ ಕಲಬುರಗಿ ಮತ್ತು ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಆದೇಶ ಹೊರಡಿಸಿದ್ದಾರೆ.
ದಿನದಿಂದ ದಿನಕ್ಕೆ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ನಡೆಯುವ ಮದುವೆ, ಸೀಮಂತ ಕಾರ್ಯಕ್ರಮಗಳನ್ನು ಮುಂದಿನ ಆದೇಶದ ವರೆಗೆ ನಿಷೇಧಿಸಲಾಗಿದ್ದು, ರಿಜಿಸ್ಟರ್ ಮದುವೆಗೆ ಮಾತ್ರ ಅವಕಾಶವಿರುವುದಾಗಿ ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ನಡೆಯುತ್ತಿರುವ ಮದುವೆ ಸಮಾರಂಭಗಳಲ್ಲಿ ಹೆಚ್ಚು ಜನ ಭಾಗವಹಿಸುತ್ತಿದ್ದು, ಇದರ ಪರಿಣಾಮ ಕಾರ್ಯಕ್ರಮದಲ್ಲಿ ಭಾಗವಹಿಸಿದವರಿಗೂ ಕೊರೋನಾ ಸೋಂಕು ಹರಡುತ್ತಿರುವುದನ್ನು ಗಮನಿಸಿದ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರು, ಮದುವೆ ಸಮಾರಂಭಕ್ಕೆ ಅನುಮತಿ ನೀಡಬಾರದೆಂದು ತಿಳಿಸಿದ ಹಿನ್ನೆಲೆಯಲ್ಲಿ ನಿಷೇಧಕ್ಕೆ ಮುಂದಾಗಿರುವುದಾಗಿ ಜಿಲ್ಲಾಧಿಕಾರಿ ಹೇಳಿದ್ದಾರೆ.
ಡಿಸಿಎಂ ಗೋವಿಂದ ಕಾರಜೋಳ ಈ ಬಗ್ಗೆ ಪತ್ರ ಬರೆದು ಕಲಬುರಗಿ ಮತ್ತು ಬಾಗಲಕೋಟೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಪರ್ಯಾಯವಾಗಿ ಉಪನೊಂದಣಾಧಿಕಾರಿಗಳ ಕಚೇರಿಯಲ್ಲಿ ಮದುವೆ ಕಾರ್ಯಗಳನ್ನ ನಡೆಸುವಂತೆ ಆದೇಶ ಹೊರಡಿಸಿದ್ದಾರೆ.
ಇತ್ತೀಚೆಗಷ್ಟೆ ಹಲವೆಡೆ ಮದುವೆ ಸಮಾರಂಭಗಳಲ್ಲಿ ಭಾಗವಹಿಸಿದ ಜನರಿಗೆ ಕೊರೊನಾ ಸೋಂಕು ತಗುಲಿತ್ತು. ಈ ಹಿನ್ನೆಲೆಯಲ್ಲಿ ಜನ ಸೇರುವ ಮದುವೆ ಸಮಾರಂಭಗಳಿಗೆ ಅನುಮತಿ ನೀಡದಂತೆ ಕ್ರಮಗೊಳ್ಳಲಾಗಿದೆ.