ವೈದ್ಯಕೀಯ ಶಿಕ್ಷಣ ಸಚಿವ ಡಾ ಸುಧಾಕರ್: ಸೋಂಕಿತನ ಪ್ರಾಥಮಿಕ ಸಂಪರ್ಕ ಹೊಂದಿಲ್ಲ, ಕ್ವಾರಂಟೈನ್ ಇಲ್ಲ! | Janata news
ಬೆಂಗಳೂರು : ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಅವರಿಗೆ ಮೂರನೇ ಬಾರಿ ಕ್ವಾರಂಟೈನ್ ಆಗುವ ಭೀತಿ ಎದುರಾಗಿತ್ತು, ಆದರೆ ಸೋಂಕಿತನ ಪ್ರಾಥಮಿಕ ಸಂಪರ್ಕ ಹೊಂದಿಲ್ಲ. ಕ್ವಾರಂಟೈನ್ ಆಗುವ ಅಗತ್ಯವಿಲ್ಲ ಎಂದು ಸಚಿವ ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿ ಮಾಹಿತಿ ನೀಡಿರುವ ಸಚಿವರು, ಆಪ್ತ ಸಹಾಯಕನಿಗೆ ಕೊರೊನಾ ಸೋಂಕು ತಗುಲಿದ್ದು, ಮತ್ತೊಮ್ಮೆ ನಾನು ಕ್ವಾರಂಟೈನ್ ಆಗಬೇಕಾಗಿದೆ ಎಂದು ಮಾಧ್ಯಮಗಳಲ್ಲಿ ವರದಿ ಗಮನಿಸಿದ್ದೇನೆ. ನಾನು ಸೋಂಕಿತನ ಪ್ರಾಥಮಿಕ ಸಂಪರ್ಕ ಹೊಂದಿಲ್ಲ. ಹೀಗಾಗಿ ಕ್ವಾರಂಟೈನ್ ಆಗುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಸಚಿವ ಸುಧಾಕರ್ ಅವರ ಆಪ್ತ ಸಹಾಯಕರಿಗೆ ಕೊರೊನಾ ಪಾಸಿಟಿವ್ ದೃಢವಾಗಿದೆ.
ಕೆಲ ದಿನಗಳ ಹಿಂದಷ್ಟೇ ಸುಧಾಕರ್ ಪತ್ನಿ, ತಂದೆಗೆ ಕೊರೊನಾ ಪಾಸಿಟಿವ್ ಬಂದಿತ್ತು. ಈ ಹಿನ್ನೆಲೆಯಲ್ಲಿ ಸಚಿವ ಸುಧಾಕರ್ ಹೋಂಕ್ವಾರಂಟೈನ್ಗೆ ಒಳಗಾಗಿದ್ದರು. ಒಂದು ವಾರ ಹೋಂಕ್ವಾರಂಟೈನ್ ಬಳಿಕ ಕರ್ತವ್ಯಕ್ಕೆ ಹಾಜರಾಗಿದ್ದರು.
ಇದಕ್ಕೂ ಮೊದಲು ಕೋವಿಡ್ ಆಸ್ಪತ್ರೆಗಳಿಗೆ ಭೇಟಿ ನೀಡಿದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಹೋಂ ಕ್ವಾರಂಟೈನ್ ಆಗಿದ್ದರು.