ನೆರೆ ಪರಿಸ್ಥಿತಿ ಎದುರಿಸಲು ಸರ್ಕಾರ ಸಿದ್ದವಾಗಿದೆ: ಸಚಿವ ಅಶೋಕ್ | Janata news
ಬೆಂಗಳೂರು : ರಾಜ್ಯದಲ್ಲಿ ಧಾರಾಕಾರ ಮಳೆಯಾಗುತ್ತಿದೆ. ರಾಜ್ಯದಲ್ಲಿ ಮಳೆಯ ಪ್ರಮಾಣ ಹೆಚ್ಚಳವಾಗಿದ್ದು, ಪ್ರವಾಹದ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಸಿಎಂ ನಿರ್ದೇಶನ ಕೊಟ್ಟಿದ್ದಾರೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ.
ನೆರೆ ವಿಚಾರವಾಗಿ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದ ಬಳಿಕ ಮಾತನಾಡಿದ ಅವರು, ಕೊಡಗು ಉಸ್ತುವಾರಿ ಸಚಿವ ಸೋಮಣ್ಣ ಅವರಿಗೆ ಕೊಡಗಿಗೆ ಹೋಗುವಂತೆ ಹೇಳಿದ್ದೇವೆ. ಚಿಕ್ಕಮಗಳೂರಿಗೆ ಸಚಿವ ಸಿ ಟಿ ರವಿ ನಾಳೆ ಹೋಗಲಿದ್ದಾರೆ ಎಂದರು. ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಸೋಮಣ್ಣ ಅವರು ಜಿಲ್ಲೆಗೆ ಭೇಟಿ ನೀಡುತ್ತಾರೆ. ನಾನು ರಾಜ್ಯದ ಹಲವು ಭಾಗಗಳಿಗೆ ಭೇಟಿ ನೀಡುತ್ತೇನೆ ಎಂದು ತಿಳಿಸಿದರು.
ರಾಜ್ಯದಲ್ಲಿ ಹಣದ ಕೊರತೆ ಇಲ್ಲ. ಕೊರೊನಾ ನಿಯಂತ್ರಣ ಸೇರಿದಂತೆ ಪ್ರವಾಹ ಕ್ರಮಗಳನ್ನು ಕೈಗೊಳ್ಳಲು ಅಗತ್ಯ ಹಣವನ್ನು ಬಿಡುಗಡೆ ಮಾಡಲು ಸಿದ್ಧವಾಗಿದೆ. ಈ ಬಗ್ಗೆ ಸಿಎಂ ಕೂಡ ಸೂಚನೆ ನೀಡಿದ್ದಾರೆ. ಕೊರೊನಾ ಮತ್ತು ಪ್ರವಾಹ ನಿರ್ವಹಣೆಗೆ ಪ್ರತ್ಯೇಕ ಹಣ ಬಿಡುಗಡೆ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.
ನಾವು ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೇವೆ. ಕೋಯ್ನಾ 60 % ತುಂಬಿದೆ. ಇನ್ನೂ ನೀರು ಬಿಡುಗಡೆ ಮಾಡಿಲ್ಲ. ಆದರೂ ಮಹಾರಾಷ್ಟ್ರ ಅಧಿಕಾರಿಗಳ ಜೊತೆ ವ್ಯಾಟ್ಸಾಪ್ ಮೂಲಕ ಟಚ್ ನಲ್ಲಿರುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇವೆ. ನೆರೆ ಮತ್ತು ತುರ್ತು ಸಂದರ್ಭ ಎದುರುಸಲು ನಮ್ಮಇಲಾಖೆ ಸರ್ವಸನ್ನದ್ಧವಾಗಿದೆ ಎಂದು ಅಶೋಕ್ ಹೇಳಿದ್ದಾರೆ.